ಹಗಲಲ್ಲದ ಇರುಳಲ್ಲದ ನಡುಗಾಲದ - ರಾಜೇಂದ್ರ ಪ್ರಸಾದ್

 ಹಗಲಲ್ಲದ ಇರುಳಲ್ಲದ ನಡುಗಾಲದ - ರಾಜೇಂದ್ರ ಪ್ರಸಾದ್


ಹಗಲಲ್ಲದ ಇರುಳಲ್ಲದ ನಡುಗಾಲದ

ನೆತ್ತಿಯ ಮೇಲೆ ಎಷ್ಟೊಂದು ಉರಿದೀಪ

ಎದೆಯ ಮೇಲೆ ತೇಲಿ ಬಿಟ್ಟಂತೆ!

ಎತ್ತ ನೋಡಿದರತ್ತ ಸಾವಿನ ದೋಣಿಗಳು

ನನ್ನನೇ ಅಟ್ಟಿಸಿಕೊಂಡು ಬಂದಂತೆ

ಬಿಡಿದೆ ಬಾಗಿಲವರೆಗೆ ಬಂದು ಅಲ್ಲಿಯೇ ಕಾಯ್ದಂತೆ

ರುಂಡವಿಲ್ಲದ ಹಾರುಪಕ್ಷಿಗಳು ಯಮಪಾಶವ

ಹಿಡಿದು ಮನೆಯ ಮೇಲಣ ಮುಗಿಲೆಲ್ಲಾ ಸುತ್ತಿದಂತೆ.

ದೇಹ ಬೆವರುತ್ತಿದೆ ಬಿಸಿಹಬೆಯಂತೆ.

ಹನುಮಾss ಇಟ್ಟು ಮರೆತ ಸಂಜೀವಿನಿ ಎಲ್ಲೋ ?

ಮರೆತದ್ದು ಮಣ್ಣಾಗಲಿ ಚಮ್ಮಾರನ ಮನೆಯ

ಗಲ್ಲೇಬಾನಿಯನಾದರೂ ಮೊಗೆದು ತಾರೋ ಸಂಜೀವರಾಯ

ನಿನ್ನ ಮನೆಕಾಯ, ಉಸಿರು ಸಿಕ್ಕಿಕೊಂಡಿದೆ.

ಬಾಗಿಲಲ್ಲಿ ದೋಣಿ

ಮುಗಿಲಲ್ಲಿ ಪಕ್ಷಿ

ಎದೆಯಲ್ಲಿ ದೀಪ

ನನ್ನ ಕಾಯುತ್ತಿವೆ. ~

Post a Comment

0 Comments
* Please Don't Spam Here. All the Comments are Reviewed by Admin.